ಯಾವುದು ಕನ್ನಡ ವ್ಯಾಕರಣ?

– ಡಿ.ಎನ್.ಶಂಕರ ಬಟ್.

ನುಡಿಯರಿಮೆಯ ಇಣುಕುನೋಟ – 12

nudi_inukuಕೇಶಿರಾಜನ ಕಾಲದಿಂದಲೂ ಕನ್ನಡ ಪಂಡಿತರು ಯಾವುದನ್ನು ‘ಕನ್ನಡ ವ್ಯಾಕರಣ’ ಎಂಬುದಾಗಿ ಕರೆಯುತ್ತ ಬಂದಿದ್ದಾರೋ ಅದು ನಿಜಕ್ಕೂ ಕನ್ನಡದ ವ್ಯಾಕರಣವೇ ಅಲ್ಲ; ಸಂಸ್ಕ್ರುತ ವ್ಯಾಕರಣದ ಕಟ್ಟಲೆಗಳು ಕನ್ನಡದಲ್ಲೂ ಇರಬಹುದು, ಇಲ್ಲವೇ ಇರಬೇಕು ಎಂಬ ತಪ್ಪು ಕಲ್ಪನೆಯಲ್ಲಿ ಆ ಕಟ್ಟಲೆಗಳನ್ನು ಕನ್ನಡದಲ್ಲಿ ಕಾಣಲು ನಡೆಸಿದ ಒಂದು ವ್ಯರ‍್ತ ಪ್ರಯತ್ನ ಮಾತ್ರ.

ನಮ್ಮ ಶಾಲೆಗಳಲ್ಲಿ ಮಕ್ಕಳಿಗೆ ಇದೇ ಕನ್ನಡದ್ದಲ್ಲದ ವ್ಯಾಕರಣವನ್ನು ಕಲಿಸಲಾಗುತ್ತಿದೆ. ಅದನ್ನು ಯಾಕೆ ‘ಕನ್ನಡ ವ್ಯಾಕರಣ’ವೆಂದು ಕರೆಯಬೇಕು ಎಂಬುದನ್ನು ಮಕ್ಕಳೂ ತಿಳಿಯಲಾರರು, ಅದನ್ನು ಕಲಿಸುವ ಮಾಸ್ತರರೂ ತಿಳಿಸಿಕೊಡಲಾರರು. ಇನ್ನು ಅದರಿಂದ ಪ್ರಯೋಜನವನ್ನೇನಾದರೂ ಪಡೆಯುವುದಂತೂ ದೂರವೇ ಉಳಿಯಿತು.

ನಿಜಕ್ಕೂ ಈ ‘ವ್ಯಾಕರಣ’ ಎಂಬುದು ಏನು ಮಾಡಬೇಕು? ಒಂದು ನುಡಿಯಲ್ಲಿ ಬರುವ ಪದಗಳ ಒಳರಚನೆ ಎಂತಹದು, ಪದಗಳನ್ನು ಬಳಸಿ ಆ ನುಡಿಯಲ್ಲಿ ಸೊಲ್ಲು(ವಾಕ್ಯ)ಗಳನ್ನು ಉಂಟುಮಾಡುವುದು ಹೇಗೆ, ಮತ್ತು ಸೊಲ್ಲುಗಳನ್ನು ಬಳಸಿ ಅದರಲ್ಲಿ ಬರಹಗಳನ್ನು ಬರೆಯುವುದು ಹೇಗೆ ಎಂಬಂತಹ ಸೊಲ್ಲುಗಳ ಕುರಿತಾಗಿರುವ ತಿಳಿವನ್ನು ಅದು ನಮಗೆ ಒದಗಿಸಬೇಕು.
ಕನ್ನಡದ ಕುರಿತಾಗಿರುವ ಇಂತಹ ತಿಳಿವನ್ನು ನಾವು ಇಲ್ಲಿ ‘ಕನ್ನಡದ ಸೊಲ್ಲರಿಮೆ’ ಎಂದು ಕರೆಯೋಣ; ಯಾಕೆಂದರೆ, ‘ಕನ್ನಡ ವ್ಯಾಕರಣ’ ಎಂಬುದಕ್ಕೆ ಇವತ್ತು ಮೇಲೆ ವಿವರಿಸಿದಂತಹ ಬೇರೆಯೇ ಹುರುಳಿದೆ.

ಪಾಣಿನಿಯೇ ಮೊದಲಾದ ಸಂಸ್ಕ್ರುತದ ಪಂಡಿತರು ಆ ನುಡಿಯಲ್ಲಿ ಸೊಲ್ಲುಗಳನ್ನು ಹೇಗೆ ಉಂಟುಮಾಡಲಾಗುತ್ತದೆ, ಅವುಗಳ ಹಿಂದಿರುವ ಕಟ್ಟಲೆಗಳು ಎಂತಹವು ಎಂಬುದನ್ನು ಕಂಡುಹಿಡಿದಿದ್ದರು, ಮತ್ತು ಅಂತಹ ಕಟ್ಟಲೆಗಳನ್ನು ಒಟ್ಟುಗೂಡಿಸಿ, ಅದನ್ನು ‘ಸಂಸ್ಕ್ರುತ ವ್ಯಾಕರಣ’ ಎಂಬುದಾಗಿ ಕರೆದಿದ್ದರು; ಅಂತಹದೇ ಕೆಲಸವನ್ನು ಇವತ್ತು ನಾವು ಕನ್ನಡದಲ್ಲಿ ನಡೆಸಬೇಕಾಗಿದೆ.
ಸೊಲ್ಲುಗಳನ್ನು ಕಟ್ಟುವ ಬಗೆ ಸಂಸ್ಕ್ರುತದಲ್ಲಿರುವುದಕ್ಕಿಂತ ಕನ್ನಡದಲ್ಲಿ ತೀರ ಬೇರಾಗಿದೆ; ಹಾಗಾಗಿ, ಸಂಸ್ಕ್ರುತ ವ್ಯಾಕರಣದಲ್ಲಿ ಬರುವ ಕಟ್ಟಲೆಗಳಿಗಿಂತ ತೀರ ಬೇರಾಗಿರುವ ಕಟ್ಟಲೆಗಳು ‘ಕನ್ನಡದ ಸೊಲ್ಲರಿಮೆ’ಯಲ್ಲಿ ಬರಬೇಕಾಗುತ್ತದೆ.

ಸಂಸ್ಕ್ರುತದಲ್ಲಿ ಎರಡು (ಇಲ್ಲವೇ ಹೆಚ್ಚು) ಪದಗಳನ್ನು ಒಟ್ಟುಸೇರಿಸಿ ಹೊಸಪದವನ್ನು ಉಂಟುಮಾಡುವ ಹೊಲಬನ್ನು ‘ಸಮಾಸ’ ಎಂಬುದಾಗಿ ಕರೆಯಲಾಗುತ್ತದೆ; ನಾಮಪದಗಳನ್ನು ಮಾತ್ರ ಈ ರೀತಿ ಸಂಸ್ಕ್ರುತದಲ್ಲಿ ಒಟ್ಟುಸೇರಿಸಲು ಬರುತ್ತದೆ. ಹಾಗಾಗಿ, ಒಟ್ಟುಸೇರಿಸಿದ ಪದಗಳಲ್ಲಿ ಯಾವುದು ಮುಕ್ಯ ಎಂಬುದರ ಮೇಲೆ ಈ ಸಮಾಸಗಳನ್ನು ತತ್ಪುರುಶ (ಎರಡನೆಯದು ಮುಕ್ಯ), ಅವ್ಯಯೀಬಾವ (ಮೊದಲನೆಯದು ಮುಕ್ಯ), ದ್ವಂದ್ವ (ಎರಡೂ ಮುಕ್ಯ) ಮತ್ತು ಬಹುವ್ರೀಹಿ (ಎರಡೂ ಮುಕ್ಯವಲ್ಲ, ಬೇರೊಂದು ಪದ ಮುಕ್ಯ) ಎಂಬ ನಾಲ್ಕು ಬಗೆಗಳಲ್ಲಿ ಗುಂಪಿಸಬಹುದೆಂದು ಸಂಸ್ಕ್ರುತ ವ್ಯಾಕರಣಗಳು ಹೇಳುತ್ತವೆ.

ಆದರೆ, ಕನ್ನಡದಲ್ಲಿ ಎರಡು ಪದಗಳನ್ನು ಒಟ್ಟುಸೇರಿಸಿ ಹೊಸದೊಂದು ಪದವನ್ನು ಉಂಟುಮಾಡುವ ಬಗೆ ಇದರಿಂದ ತೀರ ಬೇರಾದುದು. ನಾಮಪದ, ಕ್ರಿಯಾಪದ, ಮತ್ತು ಗುಣಪದಗಳೆಂಬ ಮೂರು ಬಗೆಯ ಪದಗಳನ್ನು ಇಂತಹ ಹೊಸಪದಗಳ ಮೊದಲನೆಯ ಪದವಾಗಿ ಬಳಸಲು ಬರುತ್ತದೆ; ಅವುಗಳ ಎರಡನೆಯ ಪದ ಮಾತ್ರ ಯಾವಾಗಲೂ ಹೆಸರುಪದವಾಗಿರುತ್ತದೆ.

ಕಯ್ಮಗ್ಗ, ಬಯಲಾಟ, ನೆಲಗಡಲೆ ಎಂಬಂತಹ ಪದಗಳಲ್ಲಿ ಎರಡು ನಾಮಪದಗಳು ಒಟ್ಟುಸೇರಿವೆ; ಕಡೆಗೋಲು, ಸಿಡಿಮದ್ದು, ಬಿಚ್ಚುಕತ್ತಿ ಎಂಬಂತಹ ಪದಗಳಲ್ಲಿ ಕ್ರಿಯಾಪದ ಮತ್ತು ನಾಮಪದಗಳು ಒಟ್ಟುಸೇರಿವೆ (ಕಡೆ, ಸಿಡಿ ಮತ್ತು ಬಿಚ್ಚು ಎಂಬವು ಕ್ರಿಯಾಪದಗಳು); ಬಿಸಿನೀರು, ದೊಡ್ಡಮ್ಮ, ಬೆಳ್ಳುಳ್ಳಿ ಎಂಬಂತಹ ಪದಗಳಲ್ಲಿ ಗುಣಪದ ಮತ್ತು ನಾಮಪದಗಳು ಒಟ್ಟುಸೇರಿವೆ.
ಹಾಗಾಗಿ, ಕನ್ನಡದಲ್ಲಿ ಬರುವ ‘ಸಮಾಸ’ ಯಾವ ಬಗೆಯದು ಎಂಬುದನ್ನು ತಿಳಿಯಬೇಕಿದ್ದಲ್ಲಿ ಅಂತಹ ಹೊಸಪದಗಳಲ್ಲಿ ಮೊದಲಿಗೆ ಯಾವ ಬಗೆಯ ಪದ ಬಂದಿದೆ ಎಂಬುದನ್ನು ತಿಳಿಯಬೇಕಲ್ಲದೆ, ಸಂಸ್ಕ್ರುತದ ಹಾಗೆ ಯಾವ ಪದ ಮುಕ್ಯ ಎಂಬುದನ್ನಲ್ಲ.

ಇಂಗ್ಲಿಶ್‌ನಂತಹ ಬೇರೆ ನುಡಿಗಳಿಂದ ಹೊಸ ಹೊಸ ವಿಶಯಗಳನ್ನು ಕನ್ನಡಕ್ಕೆ ತರಬೇಕಾದಾಗ, ಅದಕ್ಕಾಗಿ ಹಲವಾರು ಹೊಸ ಪದಗಳನ್ನು ಕನ್ನಡದಲ್ಲಿ ಉಂಟುಮಾಡಿಕೊಳ್ಳಬೇಕಾಗುತ್ತದೆ. ನಿಜಕ್ಕೂ ಕನ್ನಡ ಪದಗಳ ಒಳರಚನೆಯೆಂತಹದು ಎಂಬುದನ್ನು ತಿಳಿದವರು ಮಾತ್ರ ಈ ಕೆಲಸವನ್ನು ಸರಿಯಾಗಿ ನಡೆಸಬಲ್ಲರು.

ಸಂಸ್ಕ್ರುತ ಪದಗಳ ಒಳರಚನೆಯೇ ಕನ್ನಡ ಪದಗಳಿಗೂ ಇದೆ ಎಂಬ ತಪ್ಪು ತಿಳಿವನ್ನು ‘ಕನ್ನಡ ವ್ಯಾಕರಣ’ಗಳಿಂದ ಪಡೆದಿರುವ ಕನ್ನಡ ಪಂಡಿತರಿಗೆ ಇಂತಹ ಹೊಸಪದಗಳನ್ನು ಕನ್ನಡದಲ್ಲೇನೇ ಉಂಟುಮಾಡುವುದು ಹೇಗೆ ಎಂಬುದು ಗೊತ್ತೇ ಇರುವುದಿಲ್ಲ. ಹಾಗಾಗಿ, ಹೊಸಪದಗಳು ಬೇಕಾದಾಗಲೆಲ್ಲ ಅವರು ಅವನ್ನು ಸಂಸ್ಕ್ರುತದಲ್ಲಿ ಉಂಟುಮಾಡಿ ಕನ್ನಡದೊಳಗೆ ತುರುಕುತ್ತಾರೆ, ಮತ್ತು ಸಂಸ್ಕ್ರುತದ ನೆರವಿಲ್ಲದೆ ಕನ್ನಡದಲ್ಲಿ ಹೊಸಪದಗಳನ್ನು ಉಂಟುಮಾಡಲು ಸಾದ್ಯವೇ ಇಲ್ಲ ಎಂಬ ತಪ್ಪು ತೀರ‍್ಮಾನಕ್ಕೆ ಬರುತ್ತಾರೆ.

ಕ್ರಿಯಾಪದಗಳನ್ನು ನಾಮಪದಗಳೊಂದಿಗೆ ಸೇರಿಸಿ ಹೊಸಪದಗಳನ್ನು ಸಂಸ್ಕ್ರುತದಲ್ಲಿ ಉಂಟುಮಾಡಲು ಬರುವುದಿಲ್ಲವಾದರೂ ಕನ್ನಡದಲ್ಲಿ ಬರುತ್ತದೆ ಎಂಬ ಕನ್ನಡದ್ದೇ ಆದ ಸೊಲ್ಲರಿಮೆಯ ಕಟ್ಟಲೆಯನ್ನು ತಿಳಿದವರಿಗೆ ನೂರಾರು ಹೊಸಪದಗಳನ್ನು ಕನ್ನಡದಲ್ಲೇನೇ ಉಂಟುಮಾಡಲು ಬರುತ್ತದೆ. ಇಂಗುಗುಂಡಿ, ಇಡುಗಂಟು, ಇಳಿನೀರು, ಉಜ್ಜುಗಾಯ, ಉಬ್ಬುಗನ್ನಡಿ, ಕಟ್ಟುಪಟ್ಟಿ, ಕರೆಸಾಲ, ತಡೆಯೋಟ, ತೇಲುಮನೆ, ತಳ್ಳುಗುಂಡಿ ಮೊದಲಾದ ಇಂತಹ ಪದಗಳು ಕನ್ನಡ ಬರಹದಲ್ಲೂ ತುಂಬಾ ಚನ್ನಾಗಿ ಹೊಂದಿಕೊಳ್ಳುತ್ತವೆ.

ಕನ್ನಡದ ಆಡುನುಡಿಗಳಲ್ಲಿಯೂ ಈ ಹೊಲಬನ್ನು ಬಳಸಿ ಉಂಟುಮಾಡಿರುವ ತುಂಬುಕಡಬು, ಬಿಚ್ಚೋಲೆ, ತೂಗುದೀಪ ಎಂಬಂತಹ ಹಲವಾರು ಪದಗಳು ಬಳಕೆಯಲ್ಲಿವೆ; ಆದರೆ, ಸಂಸ್ಕ್ರುತ ವ್ಯಾಕರಣದ ಕಟ್ಟಲೆಗಳೇ ಕನ್ನಡದಲ್ಲೂ ಇವೆಯೆಂಬುದಾಗಿ ಬ್ರಮಿಸುವ ‘ಕನ್ನಡ ವ್ಯಾಕರಣ’ಗಳಿಂದಾಗಿ ದಾರಿತಪ್ಪಿರುವ ಕನ್ನಡ ಪಂಡಿತರು ತಮ್ಮಲ್ಲಿ ಸ್ವಾಬಾವಿಕವಾಗಿ ಬೆಳೆದುಬಂದಿರಬಹುದಾದ ಈ ತಾಯ್ನುಡಿಯ ಅಳವನ್ನೇ ಕಳೆದುಕೊಂಡಿದ್ದಾರೆ.

ಸಂಸ್ಕ್ರುತದ ವಾಕ್ಯಗಳಲ್ಲಿ ಏಳು ವಿಬಕ್ತಿಗಳು ಬಳಕೆಯಾಗುತ್ತವೆ ಎಂಬುದನ್ನು ಸಂಸ್ಕ್ರುತದ ಪಂಡಿತರು ಕಂಡುಕೊಂಡಿದ್ದಾರೆ; ಕನ್ನಡದ ಸೊಲ್ಲುಗಳನ್ನು ಪರಿಶೀಲಿಸಿದೆವಾದರೆ, ಅವುಗಳಲ್ಲಿ ಬರುವ ಪದಗಳಿಗೆ ಒಟ್ಟು ನಾಲ್ಕು ವಿಬಕ್ತಿರೂಪಗಳು ಮಾತ್ರ ಕಾಣಿಸುತ್ತವಲ್ಲದೆ, ಏಳು ವಿಬಕ್ತಿ ರೂಪಗಳು ಕಾಣಿಸುವುದಿಲ್ಲ; ಹಾಗಿರುವಾಗ, ಸಂಸ್ಕ್ರುತದ ಹಾಗೆ ಕನ್ನಡದಲ್ಲೂ ಏಳು ವಿಬಕ್ತಿಗಳಿರಬೇಕು ಎಂದು ಬ್ರಮಿಸಿ, ಅವನ್ನು ಕಾಣಲು ಪ್ರಯತ್ನಿಸುವ ‘ಕನ್ನಡದ ವ್ಯಾಕರಣ’ ಕನ್ನಡದ್ದಾಗುವುದು ಹೇಗೆ?

ಕನ್ನಡದಲ್ಲಿ ಮೂರು ಕಾಲಗಳಿವೆಯೆಂದು ‘ಕನ್ನಡ ವ್ಯಾಕರಣ’ಗಳು ಹೇಳುತ್ತವೆ; ಇದರಂತೆ, ಮಾಡುತ್ತೇನೆ ಎಂಬ ರೂಪ ಈಗ ನಡೆಯುತ್ತಿರುವ ಕೆಲಸವನ್ನು ತಿಳಿಸಬೇಕು, ಮತ್ತು ಮಾಡುವೆನು ಎಂಬ ರೂಪ ಮುಂದೆ ನಡೆಯಲಿರುವ ಕೆಲಸವನ್ನು ತಿಳಿಸಬೇಕು.

ಆದರೆ, ನಿಜಕ್ಕೂ ಕನ್ನಡದಲ್ಲಿ ನಾಳೆ ಮಾಡುತ್ತೇನೆ, ಬರುವ ವರ‍್ಶ ಮಾಡುತ್ತೇನೆ ಎಂಬಂತಹ ಸೊಲ್ಲುಗಳಲ್ಲಿ ಕಾಣಿಸುವ ಹಾಗೆ, ಮಾಡುತ್ತೇನೆ ಎಂಬುದು ಮುಂದೆ ನಡೆಯಲಿರುವ ಕೆಲಸವನ್ನು ತಿಳಿಸುತ್ತದೆ; ಈಗ ನಡೆಯುತ್ತಿರುವ ಕೆಲಸವನ್ನು ತಿಳಿಸಲು ಮಾಡುತ್ತಿದ್ದೇನೆ ಎಂಬ ಮಾಡು ಪದಕ್ಕೆ ಇರು ಪದವನ್ನು ಸೇರಿಸಿರುವ ಬೇರೆಯೇ ಪದರೂಪವನ್ನು ಬಳಸಲಾಗುತ್ತದೆ. ಇಂತಹ ಕಣ್ಣಿಗೆ ಹೊಡೆದು ಕಾಣಿಸುವಂತಹ ತಪ್ಪುಗಳಿರುವ ‘ಕನ್ನಡ ವ್ಯಾಕರಣ’ ಕನ್ನಡದ್ದಾಗುವುದು ಹೇಗೆ?

ಕಂಪ್ಯೂಟರ್‌ಗಳನ್ನು ಬಳಸಿ ಒಂದು ನುಡಿಯ ಸೊಲ್ಲುಗಳನ್ನು ಇನ್ನೊಂದು ನುಡಿಗೆ ಅನುವಾದಿಸಲು ಬರುತ್ತದೆ; ಆದರೆ, ಹೀಗೆ ಮಾಡಬೇಕಿದ್ದಲ್ಲಿ, ಆ ಎರಡು ನುಡಿಗಳ ವಿವರವಾದ ಸೊಲ್ಲರಿಮೆಗಳನ್ನು ಕಂಪ್ಯೂಟರ್‌ಗಳಿಗೆ ಒದಗಿಸಿಕೊಡಬೇಕಾಗುತ್ತದೆ. ಇಂಗ್ಲಿಶ್ ನುಡಿಗೆ ಈಗಾಗಲೇ ಸಾಕಶ್ಟು ವಿವರವಾದ ವ್ಯಾಕರಣವನ್ನು ಬರೆಯಲಾಗಿದ್ದು, ಅದನ್ನು ಕಂಪ್ಯೂಟರ್‌ಗಳಿಗೆ ಒದಗಿಸಿಕೊಡಲಾಗಿದೆ; ಕನ್ನಡಕ್ಕೂ ಇಂತಹದೊಂದು ವಿವರವಾದ ಸೊಲ್ಲರಿಮೆಯನ್ನು ಬರೆದಲ್ಲಿ, ಇಂಗ್ಲಿಶ್ ಬರಹಗಳನ್ನು ಕನ್ನಡಕ್ಕೆ ಅನುವಾದಿಸುವಲ್ಲಿಯೂ ಕಂಪ್ಯೂಟರನ್ನು ಬಳಸಲು ಸಾದ್ಯವಾಗಬಹುದು.

ಆದರೆ, ಇಂತಹ ಕೆಲಸಕ್ಕೆ ಸಂಸ್ಕ್ರುತ ವ್ಯಾಕರಣವನ್ನೇ ‘ಕನ್ನಡ ವ್ಯಾಕರಣ’ವೆಂದು ಬ್ರಮಿಸುವ ಕೇಶಿರಾಜನ ಕನ್ನಡ ವ್ಯಾಕರಣವಾಗಲಿ, ಇವತ್ತು ಶಾಲೆಗಳಲ್ಲಿ ಕಲಿಸುವ ‘ಕನ್ನಡ ವ್ಯಾಕರಣ’ವಾಗಲಿ ಯಾವ ನೆರವನ್ನೂ ನೀಡಲಾರದು. ಕನ್ನಡದಲ್ಲಿ ಸೊಲ್ಲುಗಳನ್ನು ಹೇಗೆ ಉಂಟುಮಾಡಲಾಗುತ್ತದೆ ಎಂಬುದನ್ನು ವಿವರವಾಗಿ ತಿಳಿಸಬಲ್ಲ ‘ಕನ್ನಡದ ಸೊಲ್ಲರಿಮೆ’ಯೊಂದೇ ಈ ಕೆಲಸದಲ್ಲಿ ನೆರವನ್ನು ನೀಡಬಲ್ಲುದು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

<< ನುಡಿಯರಿಮೆಯ ಇಣುಕುನೋಟ – 11

ನಿಮಗೆ ಹಿಡಿಸಬಹುದಾದ ಬರಹಗಳು

3 Responses

  1. smhamaha says:

    ಚಿಕ್ಕ ಕೇಳ್ವಿ … ಕನ್ನಡದಲ್ಲಿ ಮೂರು ಕಾಲಗಳು ಇಲ್ಲವೇ ?? ಇದ್ದಿಯೀ ??

    ಏಕೆಂದರೆ .. ಮಾಡಿದೆ .. ಮಾಡ್ತಾವ್ನಿ .. ಮಾಡುವೆ .. ಅಂತ ಹೇಳುತ್ತೇವೆ ತಾನೇ .. “slang” ನಲ್ಲಿ ತಪ್ಪಿದ್ದರೆ ಮನ್ನಿಸಬೇಕು

    ಅಂಕಣದ ಆ ಕುರಳು ತಿಳಿಯಲಿಲ್ಲ .. ವಸಿ ಬಿಡಿಸಿ ಹೇಳಿ

  2. bhatdns says:

    ಮಾಡ್ತಾವ್ನಿ ಎಂಬುದರಲ್ಲಿ ಮಾಡ್ತಾ ಮತ್ತು ಅವ್ನಿ ಎಂಬ ಎರಡು ಎಸಕಪದಗಳ ರೂಪಗಳು ಒಟ್ಟುಸೇರಿವೆ; ಹಾಗಾಗಿ, ಮಾಡಿದೆ ಮತ್ತು ಮಾಡುವೆ ಎಂಬ ಎರಡು ಕಾಲರೂಪಗಳು ಮಾತ್ರ ಕಾಣಿಸುತ್ತವೆಯಲ್ಲವೇ? ಇದಲ್ಲದೆ, ನಾನು ಹೇಳಿರುವುದು ಬರಹಕನ್ನಡದ ಕಾಲರೂಪಗಳ ಕುರಿತಾಗಿಯಲ್ಲದೆ ಆಡುಗನ್ನಡದ ಕಾಲರೂಪಗಳ ಕುರಿತಾಗಿಯಲ್ಲ; ಅವುಗಳಲ್ಲಿ ಬೇರೆಯೇ ಬಗೆಯ ಕಾಲರೂಪಗಳಿರಬಲ್ಲುವು. ಹವ್ಯಕ ಕನ್ನಡದಲ್ಲಿ ಮಾಡಿದೆ, ಮಾಡುತ್ತೆ ಮತ್ತು ಮಾಡುವೆ ಎಂಬ ರೂಪಗಳಿವೆ.

  3. smhamaha says:

    ಸರಿ ಸರಿ … ನನಗೆ ಕನ್ನಡ ಹೆಚ್ಚು ಬರೋಲ್ಲ ಅದಕ್ಕೆ ಕೇಳ್ದೆ … ಒಹ್ ಹವ್ಯಕ ದಲ್ಲಿ ಮೂರು ಕಾಲಗಳು ಐಯ್ತೆ !!… “ಮಾಡುತ್ತೆ ” ನಮ್ಮ ಕಡೆ ನಾಯಿ ಹಸು ಗೆ ಹೆಳುತ್ತೇವೆ

ಅನಿಸಿಕೆ ಬರೆಯಿರಿ:

%d bloggers like this: