ಮಕ್ಕಳಿಗೆ ವ್ಯಾಕರಣ ಕಲಿಸಬೇಕೇ?

ಡಿ.ಎನ್.ಶಂಕರ ಬಟ್.

ನುಡಿಯರಿಮೆಯ ಇಣುಕುನೋಟ – 15

nudi_inukuಬೇಕು ಎನ್ನುತ್ತಿದ್ದಾರೆ ಇತ್ತೀಚೆಗೆ ಹಲವು ಮಂದಿ ತಿಳಿವಿಗರು; ಆದರೆ, ವ್ಯಾಕರಣವನ್ನು ಹಿಂದಿನ ಹಾಗೆ ಒಂದು ವಿಶಯವಾಗಿ ಕಲಿಸುವ ಬದಲು, ಮಕ್ಕಳ ಓದು ಮತ್ತು ಬರಹಗಳ ಕಲಿಕೆಗೆ ನೆರವಾಗುವ ಹಾಗೆ ನೇರವಲ್ಲದ ಬಗೆಯಲ್ಲಿ ಅದನ್ನು ಕಲಿಸಬೇಕು ಎಂಬುದು ಹೆಚ್ಚಿನ ತಿಳಿವಿಗರ ತೀರ‍್ಮಾನವಾಗಿದೆ.

ನಿಜಕ್ಕೂ ವ್ಯಾಕರಣದ ಕಟ್ಟಲೆಗಳನ್ನು ಮಕ್ಕಳಿಗೆ ಕಲಿಸುವುದು ತುಂಬಾ ತೊಡಕಿನ ಕೆಲಸ. ಯಾಕೆಂದರೆ, ಮೊದಲನೆಯದಾಗಿ, ಈ ಕಟ್ಟಲೆಗಳೆಲ್ಲ ತೊಡಕು ತೊಡಕಾದವುಗಳು; ಅವನ್ನು ವಿವರಿಸಲು ಬೇರೆಯೇ ಆದ ಅರಿಮೆಯ ಪದಗಳು ಬೇಕಾಗುತ್ತವೆ. ಇದಲ್ಲದೆ, ಅವುಗಳಲ್ಲಿ ಯಾವ ಕಟ್ಟಲೆಯೂ ಬೇರೆಯಾಗಿ ನಿಲ್ಲುವುದಿಲ್ಲ; ಎಲ್ಲವೂ ಒಂದರೊಡನೊಂದು ಹೆಣೆದಿರುತ್ತವೆ. ಹಾಗಾಗಿ, ವ್ಯಾಕರಣದ ಯಾವ ಕಟ್ಟಲೆಯನ್ನು ಕಲಿಸಬೇಕಿದ್ದರೂ, ಅದಕ್ಕೆ ಬೇರೆ ಕಟ್ಟಲೆಗಳೊಂದಿಗಿರುವ ಕೊಂಡಿಗಳನ್ನೂ ಕಲಿಸಿಕೊಡಬೇಕಾಗುತ್ತದೆ.

ಎರಡನೆಯದಾಗಿ, ವ್ಯಾಕರಣದ ಕಟ್ಟಲೆಗಳು ಓದಿಗೆ ಇಲ್ಲವೇ ಬರಹಕ್ಕೆ ಯಾವ ರೀತಿಯಲ್ಲಿ ನೆರವಿಗೆ ಬರಬಲ್ಲುವು ಎಂಬುದು ಅವನ್ನು ಕಲಿಯುವವರಿಗೆ ಸುಲಬವಾಗಿ ಗೊತ್ತಾಗುವುದಿಲ್ಲ, ಮತ್ತು ಅವು ಯಾಕೆ ಬೇಕಾಗುತ್ತವೆ ಎಂಬುದನ್ನು ತಿಳಿಯದವರಿಗೆ ಅವನ್ನು ಕಲಿಯುವಲ್ಲಿ ಯಾವ ಹುರುಪೂ ಇರುವುದಿಲ್ಲ. ಅವುಗಳ ಕಲಿಕೆ ಬರಿಯ ಒಂದು ಯಾಂತ್ರಿಕ ಕೆಲಸವಾಗಿಬಿಡುತ್ತದೆ.

ಹಿಂದಿನ ಕಾಲದ ಶಾಲೆಗಳಲ್ಲಿ ವ್ಯಾಕರಣವನ್ನು ಬೇರೆಯೇ ಒಂದು ವಿಶಯವಾಗಿ ಕಲಿಸಲಾಗುತ್ತಿತ್ತು, ಮತ್ತು ಈ ಕಾರಣದಿಂದಾಗಿ, ಅದೊಂದು ತುಂಬಾ ತೊಡಕು ತೊಡಕಾದ, ಮತ್ತು ತೀರಾ ಅನವಶ್ಯಕವಾದ ವಿಶಯವೆಂಬುದಾಗಿ ಅದನ್ನು ಕಲಿಯುವವರಿಗೆ ಮಾತ್ರವಲ್ಲ, ಅದನ್ನು ಕಲಿಸುವವರಿಗೂ ಅನಿಸುತ್ತಿತ್ತು. ಅಯ್ದಾರು ವರ‍್ಶ ಅದನ್ನು ಕಲಿಸಿದರೂ ಮಕ್ಕಳ ಓದಿನಲ್ಲಿ ಇಲ್ಲವೇ ಬರವಣಿಗೆಯಲ್ಲಿ ಅದರಿಂದಾಗಿ ಯಾವ ಮಾರ‍್ಪಾಡೂ ಉಂಟಾಗುವುದಿಲ್ಲ ಎಂಬುದನ್ನು ಸಂಶೋದನೆಗಳು ತೋರಿಸಿಕೊಟ್ಟುವು. ಇದನ್ನು ಗಮನಿಸಿದ ಹಲವು ತಿಳಿವಿಗರು ನುಡಿಯ ಕಲಿಕೆಗೆ ವ್ಯಾಕರಣದ ತಿಳಿವು ಬೇಕಾಗಿಲ್ಲ, ಮತ್ತು ಅದನ್ನು ಶಾಲೆಗಳಲ್ಲಿ ಕಲಿಸಬೇಕಾಗಿಲ್ಲ ಎಂಬ ತೀರ‍್ಮಾನಕ್ಕೆ ಬಂದಿದ್ದರು.

ಆದರೆ, ನಿಜಕ್ಕೂ ಇದೊಂದು ತಪ್ಪಾದ ತೀರ‍್ಮಾನವಾಗಿತ್ತು; ಯಾಕೆಂದರೆ, ಯಾವ ಕೆಲಸವೇ ಆಗಲಿ, ಅದನ್ನು ಜಾಣ್ಮೆಯಿಂದ ನಡೆಸಬೇಕೆಂದಿರುವವರಿಗೆ ಅದರ ಒಳಗುಟ್ಟಿನ ತಿಳಿವು ನೆರವಿಗೆ ಬಂದೇ ಬರುತ್ತದೆ. ಎತ್ತುಗೆಗಾಗಿ, ಕಾರನ್ನು ಓಡಿಸುವವರು ಅದರ ಬೇರೆ ಬೇರೆ ಅಂಗಗಳ ಗುರಿ, ಅವುಗಳ ಅಳವು-ನಲುವುಗಳು, ಅವುಗಳ ಕೆಲಸದ ಮೇಲೆ ಗಾಳಿ, ಮಳೆ, ಬಿಸಿಲು, ಮತ್ತು ದಾರಿಂii ಗೊತ್ತುಪಾಡುಗಳಿಂದ ಉಂಟಾಗಬಹುದಾದ ಅಡಚಣೆಗಳು ಮೊದಲಾದುವನ್ನು ಸರಿಯಾಗಿ ತಿಳಿದುಕೊಂಡಿರುವರಾದರೆ, ಆ ಕೆಲಸವನ್ನು ಅವರು ಹೆಚ್ಚು ಜಾಣ್ಮೆಯಿಂದ ನಡೆಸಬಲ್ಲರು.

ಓದುವ ಮತ್ತು ಬರೆಯುವ ಕೆಲಸಗಳೂ ಹೀಗೆಯೇ. ಅವುಗಳ ಒಳಗುಟ್ಟನ್ನು ತಿಳಿದುಕೊಂಡವರಿಗೆ ಅವನ್ನು ಹೆಚ್ಚು ಸುಳುವಾಗಿ ಮತ್ತು ಹೆಚ್ಚು ಚನ್ನಾಗಿ ನಡೆಸಲು ಬರುತ್ತದೆ. ಬರಹಗಳಲ್ಲಿ ಹಲವು ಬಗೆಗಳಿದ್ದು, ಅವನ್ನು ಓದಿ ತಿಳಿದುಕೊಳ್ಳುವಲ್ಲಿ ಇಲ್ಲವೇ ಅಂತಹವೇ ಬರಹಗಳನ್ನು ಹೊಸದಾಗಿ ಬರೆಯುವಲ್ಲಿ ಹಲವಾರು ಬಗೆಯ ವ್ಯಾಕರಣದ ಕಟ್ಟಲೆಗಳನ್ನು ಬಳಸಬೇಕಾಗುತ್ತದೆ; ಹಾಗಾಗಿ, ಅಂತಹ ಕಟ್ಟಲೆಗಳ ತಿಳಿವು ಈ ಕೆಲಸಗಳನ್ನು ಜಾಣ್ಮೆಯಿಂದ ನಡೆಸುವಲ್ಲಿ ನೆರವಾಗದಿರದು.

ಆದರೆ, ಮೇಲೆ ಸೂಚಿಸಿದ ಹಾಗೆ, ವ್ಯಾಕರಣದ ಕಟ್ಟಲೆಗಳನ್ನು ನೇರವಾಗಿ ಕಲಿಸಹೋಗದೆ, ಓದುವ ಮತ್ತು ಬರೆಯುವ ಕೆಲಸಗಳಲ್ಲಿ ಅವು ಹೇಗೆ ನೆರವಾಗುತ್ತವೆ ಎಂಬುದನ್ನು ತೋರಿಸಿಕೊಡುವ ಮೂಲಕ ಕಲಿಸಿದಲ್ಲಿ ಮಾತ್ರ ಅವು ಮಕ್ಕಳ ಓದು-ಬರಹದ ಕಲಿಕೆಯ ಮೇಲೆ ಪರಿಣಾಮವನ್ನು ಬೀರಬಲ್ಲುವು.

ಎತ್ತುಗೆಗಾಗಿ, ಕೆಲವು ಸೊಲ್ಲು(ವಾಕ್ಯ)ಗಳ ಹುರುಳೇನೆಂಬುದನ್ನು ತಿಳಿದುಕೊಳ್ಳುವಲ್ಲಿ ಮಕ್ಕಳಿಗೆ ತೊಂದರೆಯಾಗುತ್ತಿರಬಹುದು; ಅಂತಹ ಸೊಲ್ಲುಗಳಲ್ಲಿ ಮುಕ್ಯ ಅಂಶಗಳನ್ನು ಮುಕ್ಯವಲ್ಲದ ಅಂಶಗಳಿಂದ ಬೇರ‍್ಪಡಿಸುವುದು ಹೇಗೆ ಎಂಬುದನ್ನು ಮಕ್ಕಳಿಗೆ ತೋರಿಸಿಕೊಟ್ಟಲ್ಲಿ, ಅವರು ಅವುಗಳ ಹುರುಳನ್ನು ಸುಲಬವಾಗಿ ತಿಳಿದುಕೊಳ್ಳಬಲ್ಲರು. ಆದರೆ, ಸೊಲ್ಲುಗಳಲ್ಲಿ ಮುಕ್ಯ ಅಂಶ ಯಾವುದು ಮತ್ತು ಮುಕ್ಯವಲ್ಲದ ಅಂಶ ಯಾವುದು ಎಂಬುದನ್ನು ತೋರಿಸಿಕೊಡಬೇಕಾದರೆ, ಅವನ್ನು ಹೇಗೆ ಕಟ್ಟಲಾಗಿದೆ, ಅವುಗಳ ಒಳರಚನೆಯೆಂತಹದು ಎಂಬಂತಹ ವ್ಯಾಕರಣಕ್ಕೆ ಸಂಬಂದಿಸಿರುವ ಕಟ್ಟಲೆಗಳನ್ನು ಕಲಿಸಬೇಕಾಗುತ್ತದೆ.

ಇತ್ತೀಚೆಗೆ ಹೆಚ್ಚು ಹೆಚ್ಚು ಮಂದಿ ತಿಳಿವಿಗರು ಓದು-ಬರಹದ ಕಲಿಕೆಯಲ್ಲಿ ವ್ಯಾಕರಣದ ಕೊಡುಗೆ ನಿಜಕ್ಕೂ ತುಂಬ ದೊಡ್ಡದು ಎಂಬುದನ್ನು ಕಂಡುಕೊಳ್ಳುತ್ತಿದ್ದಾರೆ. ಮಕ್ಕಳು ತಾವು ಓದಿ ತಿಳಿದುಕೊಳ್ಳಬೇಕಾಗಿರುವ ಇಲ್ಲವೇ ಬರೆಯಬೇಕಾಗಿರುವ ಸೊಲ್ಲುಗಳ ಒಳರಚನೆಯೆಂತಹದು ಎಂಬುದನ್ನು ಗಮನಿಸುವ ಹಾಗೆ ಮಾಡಿದಲ್ಲಿ ಅವರಿಗೆ ಆ ಕೆಲಸವನ್ನು ನಡೆಸಲು ಹೆಚ್ಚು ಸುಲಬವಾಗುತ್ತದೆ ಎಂಬುದನ್ನೂ ಅವರು ಕಂಡುಕೊಳ್ಳುತ್ತಿದ್ದಾರೆ.

ಇಂತಹ ತಿಳುವಳಿಕೆ ತರಗತಿಯಲ್ಲಿ ಮುಂದೆ ಇರುವ ಮಕ್ಕಳಿಗಿಂತಲೂ ಹಿಂದೆ ಬೀಳುವ ಮಕ್ಕಳಿಗೆ ಹೆಚ್ಚು ನೆರವಾಗುತ್ತದೆ ಎಂಬುದನ್ನೂ ಕಂಡುಕೊಳ್ಳಲಾಗಿದೆ. ಎತ್ತುಗೆಗಾಗಿ, ಮಾತಿನಲ್ಲಿ ಬರುವ ಹಾಗೆ ತುಂಡು ತುಂಡಾಗಿರುವ ಸೊಲ್ಲುಗಳು ಬರಹದಲ್ಲಿ ಬರಬಾರದು; ಅವೆಲ್ಲ ಇಡಿ ಇಡಿಯಾಗಿರಬೇಕು; ತುಂಡು ಸೊಲ್ಲುಗಳನ್ನು ಇಡೀ ಸೊಲ್ಲುಗಳ ಅಂಗಗಳನ್ನಾಗಿ ಮಾತ್ರ ಬಳಸಬಹುದು ಎಂದು ಹೇಳಿಕೊಟ್ಟಾಗ, ತರಗತಿಯಲ್ಲಿ ಮುಂದೆ ಇರುವ ಮಕ್ಕಳಿಗೆ ತಾವೇನು ಮಾಡಬೇಕು ಎಂಬುದು ಒಡನೆಯೇ ಗೊತ್ತಾಗುತ್ತದೆ.

ಆದರೆ, ತರಗತಿಯಲ್ಲಿ ಹಿಂದೆ ಬೀಳುವ ಮಕ್ಕಳಿಗೆ ಅದು ಗೊತ್ತಾಗುವುದಿಲ್ಲ. ಅವರಿಗೆ ಅದು ಗೊತ್ತಾಗುವ ಹಾಗೆ ಮಾಡಬೇಕಿದ್ದಲ್ಲಿ, ತುಂಡು ಸೊಲ್ಲುಗಳಿಗೂ ಇಡೀ ಸೊಲ್ಲುಗಳಿಗೂ ನಡುವಿರುವ ವ್ಯತ್ಯಾಸ ಎಂತಹದು ಎಂಬುದನ್ನು, ಮತ್ತು ತುಂಡು ಸೊಲ್ಲುಗಳನ್ನು ಇಡೀ ಸೊಲ್ಲುಗಳ ಅಂಗಗಳಾಗಿ ಮಾಡಿ ಬಳಸುವುದು ಹೇಗೆ ಎಂಬುದನ್ನು ತೋರಿಸಿಕೊಡಬೇಕಾಗುತ್ತದೆ. ಎಂದರೆ, ಇಡಿಯಾಗಿರುವ ಸೊಲ್ಲುಗಳ ಒಳರಚನೆಯ ಹಿಂದಿರುವ ವ್ಯಾಕರಣದ ಕಟ್ಟಲೆಗಳನ್ನು ಅವರಿಗೆ ವಿವರಿಸಬೇಕಾಗುತ್ತದೆ.

ಕನ್ನಡದ ಮಟ್ಟಿಗೆ ಹೇಳುವುದಾದರೆ, ಇನ್ನೊಂದು ಸಮಸ್ಯೆಯೂ ವ್ಯಾಕರಣದ ಕಲಿಕೆಯನ್ನು ಕಾಡುತ್ತಿದೆ; ಅದೇನೆಂದರೆ, ಇವತ್ತು ಕನ್ನಡ ವ್ಯಾಕರಣದ ಹೊತ್ತಗೆಗಳಲ್ಲಿ ಕಾಣಿಸಿಕೊಳ್ಳುವ ಕಟ್ಟಲೆಗಳಲ್ಲಿ ಹೆಚ್ಚಿನವನ್ನೂ ಕನ್ನಡ ಬರಹಗಳನ್ನು ಓದುವಲ್ಲಿ ಮತ್ತು ಬರೆಯುವಲ್ಲಿ ನೆರವಾಗುವ ಹಾಗೆ ಕಲಿಸಲು ಯಾರಿಗೂ ಸಾದ್ಯವಾಗಲಾರದು. ಯಾಕೆಂದರೆ, ಈ ವ್ಯಾಕರಣಗಳನ್ನು ಬರೆದವರು ಸಂಸ್ಕ್ರುತ ವ್ಯಾಕರಣದಲ್ಲಿದ್ದ ಕಟ್ಟಲೆಗಳನ್ನು ಹಾಗೆಯೇ ಕನ್ನಡಕ್ಕೆ ತಂದುಹಾಕಿದ್ದಾರಲ್ಲದೆ, ನಿಜಕ್ಕೂ ಕನ್ನಡ ಪದಗಳ ಇಲ್ಲವೇ ಸೊಲ್ಲುಗಳ ಬಳಕೆಯ ಹಿಂದೆ ಎಂತಹ ಕಟ್ಟಲೆಗಳು ಅಡಗಿವೆ ಎಂಬುದನ್ನು ಕಂಡುಹಿಡಿಯುವ ಮೂಲಕ ಅವನ್ನು ಬರೆದಿಲ್ಲ.

ಹಾಗಾಗಿ, ಈ ಕಟ್ಟಲೆಗಳನ್ನು ಸಂಸ್ಕ್ರುತ ಬರಹಗಳನ್ನು ಓದುವಲ್ಲಿ ಮತ್ತು ಬರೆಯುವಲ್ಲಿ ನೆರವಾಗುವ ಹಾಗೆ ಕಲಿಸಲು ಸಾದ್ಯವಾಗಬಹುದಲ್ಲದೆ, ಕನ್ನಡ ಬರಹಗಳನ್ನು ಓದುವಲ್ಲಿ ಮತ್ತು ಬರೆಯುವಲ್ಲಿ ನೆರವಾಗುವ ಹಾಗೆ ಕಲಿಸಲು ಸಾದ್ಯವಾಗಲಾರದು. ಕನ್ನಡ ಬರಹಗಳಲ್ಲಿ ಕನ್ನಡದವೇ ಆದ ಬೇರೆಯೇ ಕಟ್ಟಲೆಗಳು ಬಳಕೆಯಾಗುತ್ತವೆ; ಈ ಕಟ್ಟಲೆಗಳು ಎಂತಹವು ಎಂಬುದನ್ನು ಇವತ್ತು ಕಂಡುಹಿಡಿಯಬೇಕಾಗಿದೆ, ಮತ್ತು ಮಕ್ಕಳ ಓದು-ಬರಹದ ಕಲಿಕೆಗೆ ಅವು ಹೇಗೆ ನೆರವಾಗಬಲ್ಲುವು ಎಂಬುದನ್ನೂ ಕಂಡುಹಿಡಿಯಬೇಕಾಗಿದೆ. ಈ ಎರಡು ಕೆಲಸಗಳನ್ನು ನಡೆಸಿದ ಮೇಲಶ್ಟೇ ಮಕ್ಕಳಿಗೆ ಅವರ ಓದಿನ ಮತ್ತು ಬರಹದ ಕಲಿಕೆಯಲ್ಲಿ ನೆರವಾಗುವ ಹಾಗೆ ಕನ್ನಡ ವ್ಯಾಕರಣದ ಕಟ್ಟಲೆಗಳನ್ನು ಕಲಿಸಲು ಸಾದ್ಯವಾಗಬಲ್ಲುದು.

ಮಾತಿನ ಮೂಲಕ ನಾವು ನಮ್ಮ ಅನಿಸಿಕೆಗಳನ್ನು ಮತ್ತು ಅನುಬವಗಳನ್ನು ಇನ್ನೊಬ್ಬರಿಗೆ ಹೇಗೆ ತಿಳಿಸುತ್ತೇವೆ, ಮತ್ತು ಇನ್ನೊಬ್ಬರು ಬಳಸಿದ ಮಾತುಗಳಿಂದ ಅವರ ಅನಿಸಿಕೆ ಮತ್ತು ಅನುಬವಗಳು ಎಂತಹವು ಎಂಬುದು ನಮಗೆ ಹೇಗೆ ಗೊತ್ತಾಗುತ್ತದೆ ಎಂಬುದನ್ನು ವ್ಯಾಕರಣ ತಿಳಿಸುತ್ತದೆ. ಮನುಶ್ಯನಲ್ಲಿ ಮಾತ್ರವೇ ಕಾಣಿಸಿಕೊಳ್ಳುವ ಈ ಒಂದು ವಿಶಿಶ್ಟವಾದ ಅಳವಿನ ಕುರಿತಾಗಿ ಏನು ಹೇಳಬೇಕಿದ್ದರೂ ವ್ಯಾಕರಣದಲ್ಲಿ ಬಳಕೆಯಾಗುವ ಅರಿಮೆಯ ಪದಗಳನ್ನು ಬಳಸಲೇಬೇಕಾಗುತ್ತದೆ. ಹಾಗಾಗಿ, ಮಕ್ಕಳಿಗೆ ಈ ಅರಿಮೆಯ ತಿಳಿವು ದೊರಕುವಂತೆ ಮಾಡುವುದು ಬೇರೆಲ್ಲಾ ಬಗೆಯ ಅರಿಮೆ(ವಿಜ್ನಾನ)ಗಳ ತಿಳಿವು ದೊರಕುವಂತೆ ಮಾಡುವಶ್ಟೇ ಮುಕ್ಯವಾದುದು.

ಹಾಗಾಗಿ, ಅದರ ತಿಳಿವನ್ನು ಮಕ್ಕಳಿಗೆ ಯಾವಾಗ ಮತ್ತು ಹೇಗೆ ಕೊಡಿಸಬಹುದು ಎಂಬ ವಿಶಯದಲ್ಲಿ ಚರ‍್ಚೆ ನಡೆಸಬಹುದಲ್ಲದೆ, ಅದು ಬೇಕೇ ಬೇಡವೇ ಎಂಬ ವಿಶಯದಲ್ಲಲ್ಲ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

<< ನುಡಿಯರಿಮೆಯ ಇಣುಕುನೋಟ – 14

ನಿಮಗೆ ಹಿಡಿಸಬಹುದಾದ ಬರಹಗಳು

1 Response

  1. 20/11/2013

    […] << ನುಡಿಯರಿಮೆಯ ಇಣುಕುನೋಟ – 15 […]

ಅನಿಸಿಕೆ ಬರೆಯಿರಿ:

%d bloggers like this: