ಕನ್ನಡ ನುಡಿಯ ಸೊಗಡು

ಡಿ.ಎನ್.ಶಂಕರ ಬಟ್

ನುಡಿಯರಿಮೆಯ ಇಣುಕುನೋಟ – 33

nudi_inukuಎಲ್ಲಾ ನುಡಿಗಳಿಗೂ ಅವುಗಳದೇ ಆದ ಒಂದು ಸೊಗಡು ಎಂಬುದಿರುತ್ತದೆ. ಇದನ್ನು ಬರಹಗಳು ಹೆಚ್ಚು ಕೆಡದಂತೆ ಉಳಿಸಿಕೊಳ್ಳಬೇಕು. ಇಲ್ಲವಾದರೆ ಅವು ತಮ್ಮ ಜೀವಂತಿಕೆಯನ್ನು ಕಳೆದುಕೊಳ್ಳುತ್ತವೆ, ಮತ್ತು ಸಾಮಾನ್ಯ ಜನರಿಂದ ದೂರವಾಗುತ್ತವೆ. ಅಂತಹ ಬರಹಗಳನ್ನು ಕಲಿಯುವ ಮತ್ತು ಬಳಸುವ ಕೆಲಸವೂ ಆ ನುಡಿಯನ್ನಾಡುವ ಜನರಿಗೆ ತುಂಬಾ ತೊಡಕಿನದಾಗುತ್ತದೆ. ನುಡಿಗಳಿಗಿರುವ ಈ ಸೊಗಡು ಅವುಗಳ ಪದಗಳಲ್ಲಿ ಬರುವ ಉಲಿಗಳಲ್ಲಿ, ಉಲಿಗಳ ಓರಣಗಳಲ್ಲಿ, ಪದಗಳಿಗೆ ಒಟ್ಟು(ಪ್ರತ್ಯಯ)ಗಳನ್ನು ಇಲ್ಲವೇ ಬೇರೆ ಪದಗಳನ್ನು ಸೇರಿಸಿದಾಗ ಅವುಗಳ ಉಲಿಗಳಲ್ಲಿ ನಡೆಯುವ ಮಾರ‍್ಪಾಡುಗಳಲ್ಲಿ, ಪದಗಳನ್ನು ಸೇರಿಸಿ ಬೇರೆ ಪದಗಳನ್ನು ಉಂಟುಮಾಡುವ ಬಗೆಗಳಲ್ಲಿ, ಮತ್ತು ಪದಗಳಿಂದ ಪದಕಂತೆಗಳನ್ನು ಮತ್ತು ಸೊಲ್ಲುಗಳನ್ನು ಉಂಟುಮಾಡುವ ಬಗೆಗಳಲ್ಲಿ ಕಾಣಿಸಿಕೊಳ್ಳುತ್ತದೆ.

ಕನ್ನಡಕ್ಕೂ ಇಂತಹ ತನ್ನದೇ ಆದ ಒಂದು ಸೊಗಡಿದೆ, ಮತ್ತು ಅದು ಸಂಸ್ಕ್ರುತ, ಹಿಂದಿ, ಇಂಗ್ಲಿಶ್ ಮೊದಲಾದ ಬೇರೆ ನುಡಿಗಳಿಗಿರುವ ಸೊಗಡಿಗಿಂತ ತೀರ ಬೇರಾಗಿದೆ; ಕನ್ನಡದ ಉಲಿಗಳು, ಅವುಗಳ ಓರಣಗಳು, ಅವುಗಳ ಸೇರಿಕೆಯ ಮಾರ‍್ಪಾಡುಗಳು, ಕನ್ನಡದಲ್ಲಿ ಪದ, ಪದಕಂತೆ ಮತ್ತು ಸೊಲ್ಲುಗಳನ್ನು ಉಂಟುಮಾಡುವ ಬಗೆಗಳು ಮೊದಲಾದುವನ್ನು ಸಂಸ್ಕ್ರುತದಂತಹ ಬೇರೆ ನುಡಿಗಳಲ್ಲಿ ಕಾಣಿಸುವ ಬಗೆಗಳೊಂದಿಗೆ ಹೋಲಿಸಿ ನೋಡಿದಾಗ, ನಿಜಕ್ಕೂ ಕನ್ನಡದ ಸೊಗಡು ಎಂತಹದು ಎಂಬುದು ಗೊತ್ತಾಗುತ್ತದೆ.

(1) ಸಂಸ್ಕ್ರುತ ಪದಗಳಲ್ಲಿ ಬಳಕೆಯಾಗುವ ಖಛಠಥಫ ಮತ್ತು ಘಝಢಧಭಗಳೆಂಬ ಒತ್ತುಸಿರಿನ ಬರಿಗೆಗಳು (ಮಹಾಪ್ರಾಣಾಕ್ಶರಗಳು) ಕನ್ನಡ ಪದಗಳಲ್ಲಿಲ್ಲ; ಆದರೆ, ಸಂಸ್ಕ್ರುತ ಪದಗಳಲ್ಲಿ ಕಾಣಿಸದಿರುವ ಗಿಡ್ಡ ಎಕಾರ ಮತ್ತು ಒಕಾರಗಳು ಕನ್ನಡ ಪದಗಳಲ್ಲಿವೆ. ಸಂಸ್ಕ್ರುತದಲ್ಲಿರುವ ಋಕಾರ ಮತ್ತು ಷಕಾರಗಳು ಕನ್ನಡದಲ್ಲಿಲ್ಲ; ಆದರೆ, ಸಂಸ್ಕ್ರುತದಲ್ಲಿಲ್ಲದ ಎಯ್, ಒಯ್, ಉಯ್, ಆಯ್, ಒವ್, ಇವ್ ಮೊದಲಾದ ಹಲವು ಸ್ವರ ಮತ್ತು ಯಕಾರ ಇಲ್ಲವೇ ವಕಾರಗಳ ಜೋಡಿಗಳು ಕನ್ನಡದಲ್ಲಿವೆ.

(2) ಈ ಎರಡು ನುಡಿಗಳಿಗೂ ಸಮಾನವಾಗಿರುವ ಅಕ್ಶರಗಳು ಹಲವಿವೆಯಾದರೂ ಅವು ಒಂದೇ ರೀತಿಯಾಗಿ ಬಳಕೆಯಾಗುವುದಿಲ್ಲ. ಸಂಸ್ಕ್ರುತದಲ್ಲಿ ಒತ್ತಕ್ಶರಗಳಿಂದ ಮೊದಲಾಗುವ ಪದಗಳು ಸಾಕಶ್ಟಿವೆ (ಕ್ರಾಂತಿ, ಕ್ಷಮೆ, ಜ್ಞಾನ, ಜ್ಯೋತಿ, ದ್ವೇಷ, ಮ್ಲೇಚ್ಛ). ಆದರೆ ಕನ್ನಡದವೇ ಆದ ಪದಗಳಲ್ಲಿ ಆ ರೀತಿ ಒತ್ತಕ್ಶರಗಳು ಪದಗಳ ಮೊದಲಿಗೆ ಬರುವುದಿಲ್ಲ. ಪದಗಳ ನಡುವೆ ಬರಬಲ್ಲ ಒತ್ತಕ್ಶರಗಳಲ್ಲೂ ಸಂಸ್ಕ್ರುತ ಮತ್ತು ಕನ್ನಡ ನುಡಿಗಳ ನಡುವೆ ವ್ಯತ್ಯಾಸವಿದೆ. ಸಂಸ್ಕ್ರುತದ ಭಕ್ತ, ಅಜ್ಞಾನ, ವತ್ಸ, ಮತ್ಸ್ಯ ಮೊದಲಾದ ಪದಗಳಲ್ಲಿ ನಡುವೆ ಬಂದಿರುವ ಕ್ತ್, ಜ್ಞ್, ತ್ಸ್, ತ್ಸ್ಯ್ ಮೊದಲಾದ ಹಲವು ಬಗೆಯ ಒತ್ತಕ್ಶರಗಳು ಕನ್ನಡ ಪದಗಳಲ್ಲಿ ಕಾಣಿಸುವುದಿಲ್ಲ.

(3) ಎರಡು ಇಲ್ಲವೇ ಹೆಚ್ಚು ಪದಗಳನ್ನು ಒಟ್ಟುಸೇರಿಸಿ ಹೊಸ ಪದಗಳನ್ನು ತಯಾರಿಸುವ ಹೊಲಬುಗಳು ಈ ಎರಡು ನುಡಿಗಳಲ್ಲಿ ಬೇರೆ ಬೇರಾಗಿವೆ. ಸಂಸ್ಕ್ರುತದಲ್ಲಿ ಸಾಮಾನ್ಯವಾಗಿ ಹೆಸರುಪದಗಳನ್ನು ಮಾತ್ರ ಇಂತಹ ರಚನೆಗಳಲ್ಲಿ ಬಳಸಲಾಗುತ್ತದೆ; ಆದರೆ, ಕನ್ನಡದಲ್ಲಿ ಹೆಸರುಪದ (ತಲೆಗೂದಲು, ಬಯಲಾಟ), ಎಸಕಪದ (ಚುಚ್ಚುಮದ್ದು, ಕಡೆಗೋಲು) ಮತ್ತು ಪರಿಚೆಪದಗಳೆಂಬ (ದೊಡ್ಡಮ್ಮ, ಬಿಸಿನೀರು) ಮೂರು ಬಗೆಯ ಪದಗಳನ್ನೂ ಇಂತಹ ರಚನೆಗಳಲ್ಲಿ ಬಳಸಲು ಬರುತ್ತದೆ.

(4) ಕನ್ನಡದಲ್ಲಿ ಸಾಮಾನ್ಯವಾಗಿ ಎರಡಕ್ಕಿಂತ ಹೆಚ್ಚು ಪದಗಳನ್ನು ಈ ರೀತಿ ಜೋಡಿಸುವುದು ಅಪರೂಪ; ಆದರೆ, ಸಂಸ್ಕ್ರುತದಲ್ಲಿ ಮೂರು-ನಾಲ್ಕು ಪದಗಳನ್ನು ಸೇರಿಸಿ ರಚಿಸಿರುವ ಜೋಡುಪದಗಳೂ ಬೇಕಾದಶ್ಟಿವೆ (ಪೂರ್ವಜನ್ಮಕೃತಂ, ಮತ್ತಮಾತಂಗಗಾಮಿ, ಸಕಲನೀತಿಶಾಸ್ತ್ರತತ್ವಜ್ಞಃ).

(5) ಒಟ್ಟು(ಪ್ರತ್ಯಯ)ಗಳನ್ನು ಸೇರಿಸಿ ಹೊಸ ಪದಗಳನ್ನು ತಯಾರಿಸುವ ವಿಶಯದಲ್ಲೂ ಕನ್ನಡ ಸಂಸ್ಕ್ರುತಕ್ಕಿಂತ ಬೇರಾಗಿದೆ. ಕನ್ನಡದಲ್ಲಿ ಒಂದಕ್ಕಿಂತ ಹೆಚ್ಚು ಒಟ್ಟುಗಳನ್ನು ಸೇರಿಸಿ ರಚಿಸಿರುವ ಪದಗಳು ತುಂಬಾ ಕಡಿಮೆ; ಆದರೆ, ಸಂಸ್ಕ್ರುತದ ಹೆಚ್ಚಿನ ಪದಗಳಲ್ಲೂ ಎರಡು ಇಲ್ಲವೇ ಹೆಚ್ಚು ಒಟ್ಟುಗಳು ಸೇರಿರುವುದನ್ನು ಕಾಣಬಹುದು (ಅ-ಜ್ಞಾನ್-ಇ, ಕರ್-ತೃ-ತ್ವ). ಕನ್ನಡದಲ್ಲಿ ಒಟ್ಟುಗಳನ್ನು ಪದಗಳ ಕೊನೆಯಲ್ಲಿ ಮಾತ್ರ ಬಳಸಲು ಬರುತ್ತದೆ; ಆದರೆ, ಸಂಸ್ಕ್ರುತದಲ್ಲಿ ಅವನ್ನು ಪದಗಳ ಮೊದಲಿಗೂ ಬಳಸಬಹುದು (ಸತ್ಯ-ಅಸತ್ಯ, ಸ್ವಾಗತ-ಸುಸ್ವಾಗತ, ಜೀವಿ-ನಿರ್ಜೀವಿ, ರಕ್ಷಣೆ-ಸಂರಕ್ಷಣೆ).

(6) ಪದಕ್ಕೆ ಪದ ಸೇರಿದಾಗ, ಇಲ್ಲವೇ ಪದಕ್ಕೆ ಒಟ್ಟು ಸೇರಿದಾಗ, ಅವುಗಳಲ್ಲಿ ನಡೆಯುವ ಸೇರಿಕೆಯ ಬದಲಾವಣೆಗಳು ಕನ್ನಡ ಮತ್ತು ಸಂಸ್ಕ್ರುತ ನುಡಿಗಳಲ್ಲಿ ಬೇರೆ ಬೇರಾಗಿವೆ: ಇಕಾರದ ಅನಂತರ ಅಕಾರ ಬಂದಾಗ, ಕನ್ನಡದಲ್ಲಿ ಇಕಾರ ಬಿದ್ದುಹೋಗಿ ಅಕಾರ ಉಳಿಯುತ್ತದೆ (ಅಲ್ಲಿ+ಅಲ್ಲಿ=ಅಲ್ಲಲ್ಲಿ); ಆದರೆ, ಸಂಸ್ಕ್ರುತದಲ್ಲಿ ಇಕಾರ ಯಕಾರವಾಗುತ್ತದೆ (ಅತಿ+ಅಲ್ಪ=ಅತ್ಯಲ್ಪ). ಅಕಾರದ ಅನಂತರ ಇಕಾರ ಬಂದರೂ ಕನ್ನಡದಲ್ಲಿ ಇಂತಹದೇ ಮೊದಲನೆಯ ಸ್ವರ ಬಿದ್ದುಹೋಗಿ ಎರಡನೆಯದು ಉಳಿಯುತ್ತದೆ (ಅಲ್ಲಿಂದ+ಇಳಿದು=ಅಲ್ಲಿಂದಿಳಿದು); ಆದರೆ, ಸಂಸ್ಕ್ರುತದಲ್ಲಿ ಅವೆರಡೂ ಬಿದ್ದುಹೋಗಿ ಹೊಸದೊಂದು ಸ್ವರ (ಏಕಾರ) ಬಂದುಸೇರುತ್ತದೆ (ರಾಜ+ಇಂದ್ರ=ರಾಜೇಂದ್ರ).

(7) ಒಟ್ಟುಗಳನ್ನು ಸೇರಿಸಿ ಹೊಸಪದಗಳನ್ನು ರಚಿಸುವಲ್ಲಿ ಕನ್ನಡ ಮತ್ತು ಸಂಸ್ಕ್ರುತಗಳ ನಡುವೆ ಹಲವು ಮುಕ್ಯವಾದ ವ್ಯತ್ಯಾಸಗಳಿವೆ: ಸಂಸ್ಕ್ರುತ ಪದಗಳಿಗೆ ಯ ಇಲ್ಲವೇ ಇಕ ಒಟ್ಟನ್ನು ಸೇರಿಸಿದಾಗ, ಹಲವು ತೊಡಕಾದ ಸೇರಿಕೆಯ ನಿಯಮಗಳು ಬಳಕೆಯಾಗುತ್ತವೆ. ಪದಗಳ ಮೊದಲಿಗೆ ಬರುವ ಗಿಡ್ಡ ಅಕಾರ ಉದ್ದ ಆ ಎಂದಾಗುವುದು (ಚಪಲ-ಚಾಪಲ್ಯ, ಪ್ರಮಾಣ-ಪ್ರಾಮಾಣಿಕ), ಇ, ಈ ಮತ್ತು ಏ ಸ್ವರಗಳು ಐ ಎಂದಾಗುವುದು (ನಿಸರ್ಗ-ನೈಸರ್ಗಿಕ, ದೀನ-ದೈನ್ಯ, ಚೇತನ-ಚೈತನ್ಯ), ಉ, ಊ ಮತ್ತು ಓ ಸ್ವರಗಳು ಔ ಎಂದಾಗುವುದು (ಸುಖ-ಸೌಖ್ಯ, ಪೂರ್ವಾಹ್ನ-ಪೌರ್ವಾಹ್ನಿಕ, ಲೋಕ-ಲೌಕಿಕ) ಮೊದಲಾದವು ಇಂತಹ ಕೆಲವು ಸಂಸ್ಕ್ರುತದ ನಿಯಮಗಳು.

ಆದರೆ, ಕನ್ನಡದಲ್ಲಿ ಒಟ್ಟುಗಳನ್ನು ಸೇರಿಸಿ ಪದಗಳನ್ನು ರಚಿಸುವಲ್ಲಿ ಇವಕ್ಕಿಂತ ತೀರ ಬೇರಾಗಿರುವ ಸೇರಿಕೆಯ ನಿಯಮಗಳು ಬಳಕೆಯಾಗುತ್ತವೆ. ಇವು (ಕನ್ನಡಿಗರ ಮಟ್ಟಿಗೆ) ಸಂಸ್ಕ್ರುತದ ಸೇರಿಕೆಯ ನಿಯಮಗಳಶ್ಟು ತೊಡಕಿನವಾಗಿಲ್ಲ. ಕನ್ನಡ ಪದಗಳಿಗೆ ಇಕೆ ಒಟ್ಟನ್ನು ಸೇರಿಸಿದಾಗ ಪದಗಳ ಕೊನೆಯ ಉಕಾರ ಬಿದ್ದುಹೋಗುತ್ತದೆ (ಬಳಲು-ಬಳಲಿಕೆ, ಹೊಗಳು-ಹೊಗಳಿಕೆ, ಅಂಜು-ಅಂಜಿಕೆ) ಮತ್ತು ಪದಗಳ ಕೊನೆಯ ಇಕಾರ ಹಾಗೆಯೇ ಉಳಿದು ಇಕೆ ಒಟ್ಟಿನ ಮೊದಲ ಸ್ವರ ಬಿದ್ದುಹೋಗುತ್ತದೆ (ಇರಿ-ಇರಿಕೆ, ತಿರಿ-ತಿರಿಕೆ, ಇಳಿ-ಇಳಿಕೆ).

ಕನ್ನಡದ ಸೊಗಡು ಸಂಸ್ಕ್ರುತದ ಸೊಗಡಿಗಿಂತ ತೀರ ಬೇರಾದುದು ಎಂಬುದನ್ನು ಅವು ಬಳಸುವ ಪದಗಳ ಸ್ವರೂಪದಲ್ಲಿ ಕಾಣಿಸುವಂತಹ ಈ ವ್ಯತ್ಯಾಸಗಳು ತುಂಬಾ ಸ್ಪಶ್ಟವಾಗಿ ತೋರಿಸಿಕೊಡುತ್ತವೆ. ಕನ್ನಡ ಬರಹದಲ್ಲಿ ಹೆಚ್ಚು ಹೆಚ್ಚು ಸಂಸ್ಕ್ರುತ ಪದಗಳನ್ನು ಅವುಗಳಲ್ಲಿ ಸ್ವಲ್ಪವೂ ಬದಲಾವಣೆಯನ್ನು ಮಾಡದೆ ಬಳಸಿದಲ್ಲಿ ಅಂತಹ ಬರಹ ತನ್ನದೇ ಆದ ಸೊಗಡನ್ನು ಪೂರ‍್ತಿ ಕಳೆದುಕೊಳ್ಳುತ್ತದೆ. ಈ ರೀತಿ ತನ್ನ ಹುಟ್ಟುಸೊಗಡನ್ನು ಕಳೆದುಕೊಳ್ಳುವ ಬರಹ ತನ್ನತನವನ್ನೂ ಕಳೆದುಕೊಳ್ಳುತ್ತದೆ, ಮತ್ತು ಅದರ ಜೀವಂತಿಕೆ ನಶ್ಟವಾಗಿ ಅದರಲ್ಲಿ ಕ್ರುತಕತೆ ತುಂಬಿಕೊಳ್ಳುತ್ತದೆ. ಇದಲ್ಲದೆ, ಅಂತಹ ಬರಹಕ್ಕೂ ಹೆಚ್ಚಿನ ಕನ್ನಡಿಗರ ಮಾತಿಗೂ ನಡುವೆ ದೊಡ್ಡ ಕಂದಕವೇರ‍್ಪಟ್ಟು, ಅದು ಅವರೆಲ್ಲರಿಂದಲೂ ದೂರವಾಗುತ್ತದೆ. ಯಾಕೆಂದರೆ, ಬರಹ ಆ ರೀತಿ ಬದಲಾದಾಗಲೂ ಜನರ ಆಡುನುಡಿ ಅದಕ್ಕನುಗುಣವಾಗಿ ಬದಲಾಗುವುದಿಲ್ಲ. ಅದು ತನ್ನ ಪದಸ್ವರೂಪವನ್ನು ಮತ್ತು ಜೀವಂತಿಕೆಯನ್ನು ಉಳಿಸಿಕೊಂಡಿರುತ್ತದೆ.

ಇದಕ್ಕೆ ಕಾರಣವೇನೆಂದರೆ, ಆಡುನುಡಿಯನ್ನು ಮಕ್ಕಳು ತಮ್ಮ ಬೆಳವಣಿಗೆಯ ಅಂಗವಾಗಿ ಪಡೆಯುತ್ತಾರೆ; ಅದನ್ನು ಮಕ್ಕಳಿಗೆ ಯಾರೂ ಕಲಿಸಿಕೊಡಬೇಕಾಗಿಲ್ಲ. ಹಾಗಾಗಿ, ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಮಾರೆಡೆಗೊಳ್ಳುವಾಗ, ಅದು ತಿರುತಿರುಗಿ ಹೊಸತನವನ್ನು ಮತ್ತು ಜೀವಂತಿಕೆಯನ್ನು ಪಡೆಯುತ್ತಿರುತ್ತದೆ. ಆದರೆ, ಬರಹವನ್ನು ಮಕ್ಕಳು ಶಾಲೆಯಲ್ಲಿ ದೊಡ್ಡವರ ನೆರವಿನಿಂದ ಕಲಿಯಬೇಕಾಗುತ್ತದೆ; ಅದನ್ನು ಅವರು ತಮ್ಮ ಬೆಳವಣಿಗೆಯ ಅಂಗವಾಗಿ ಪಡೆಯುವುದಿಲ್ಲ.

ಹಾಗಾಗಿ, ಬರಹಗಾರರು ಕಾಲದಿಂದ ಕಾಲಕ್ಕೆ ಅದನ್ನು ಹೊಸದಾಗಿಸಿಕೊಳ್ಳದಿದ್ದರೆ, ಮತ್ತು ಆಡುನುಡಿಗೆ ಹತ್ತಿರವಾಗುವಂತೆ ಮಾರ‍್ಪಡಿಸಿಕೊಳ್ಳದಿದ್ದರೆ, ಅದು ಕ್ರುತಕವಾಗುತ್ತಾ ಹೋಗಿ ತನ್ನ ಹುಟ್ಟುಸೊಗಡನ್ನು ಮತ್ತು ಜೀವಂತಿಕೆಯನ್ನು ಕಳೆದುಕೊಳ್ಳುತ್ತದೆ. ಕನ್ನಡದಲ್ಲಿ ಕತೆ-ಕಾದಂಬರಿಗಳನ್ನು ಬರೆಯುವವರು ತಮ್ಮ ಬರಹ ಈ ರೀತಿ ಕ್ರುತಕವಾಗದಂತೆ ನೋಡಿಕೊಳ್ಳುತ್ತಾರೆ; ಆದರೆ, ಬೇರೆ ಬಗೆಯ ಬರಹಗಳನ್ನು ಬರೆಯುವವರು ಇದನ್ನು ಮಾಡಲು ಹೋಗದುದರಿಂದಾಗಿ ಇವತ್ತು ಅಂತಹ ಬರಹಗಳು ತುಂಬಾ ಕ್ರುತಕವಾಗಿದ್ದು ಸಾಮಾನ್ಯ ಜನರಿಗೆ ತಿಳಿಯದ ಹಾಗಾಗಿವೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು) 

<< ನುಡಿಯರಿಮೆಯ ಇಣುಕುನೋಟ – 32

ನಿಮಗೆ ಹಿಡಿಸಬಹುದಾದ ಬರಹಗಳು

1 Response

  1. 26/03/2014

    […] << ನುಡಿಯರಿಮೆಯ ಇಣುಕುನೋಟ – 33 […]

ಅನಿಸಿಕೆ ಬರೆಯಿರಿ:

%d bloggers like this: